Headlines

ಮುಡಾ ಕೇಸ್: ಸೆ.26 ರವರೆಗೆ ಜಿ.ಟಿ.ದಿನೇಶ್ ಕುಮಾರ್ ಇಡಿ ಕಸ್ಟಡಿಗೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 9 ದಿನ ಇ.ಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ದಿನೇಶ್‌ ಕುಮಾರ್ ಅವರನ್ನು ಇ.ಡಿ ಅಧಿಕಾರಿಗಳು ಇಂದು ಮಂಗಳವಾರ (ಸೆ.16) ಬಂಧಿಸಿದ್ದರು. ಬುಧವಾರ ಸಂಜೆ 4.30ಕ್ಕೆ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದೆ ತೆರೆದ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು.

ಈ ವೇಳೆ ಆರೋಪಿ ಪರ ವಕೀಲರು ಮಧ್ಯಂತರ ಜಾಮೀನಿಗೆ ಮನವಿ ಮಾಡಿದರು. ಆದರೆ, ಇದನ್ನು ತೀವ್ರವಾಗಿ ವಿರೋಧಿಸಿದ ಇ.ಡಿ ಪರ ಹಾಜರಿದ್ದ ಹೈಕೋರ್ಟ್‌ ವಕೀಲ ಮಧುಕರ ಎಂ.ದೇಶಪಾಂಡೆ, ಆರೋಪಿಯನ್ನು 14 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಇ.ಡಿ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಆರೋಪಿ ದಿನೇಶ್‌ ಕುಮಾರ್ ಅವರನ್ನು ಇದೇ ಸೆಪ್ಟೆಂಬರ್ 26ರವರೆಗೆ ಇ.ಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.

Leave a Reply

Your email address will not be published. Required fields are marked *

error: Content is protected !!