ಕಾರವಾರ, ಆಗಸ್ಟ್ 13: ಉತ್ತರಕನ್ನಡ ಜಿಲ್ಲೆಯ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. 6 ಕಾರುಗಳಲ್ಲಿ ಬಂದಿರುವ 24ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸತೀಶ್ ಸೈಲ್ ಬೆಂಗಳೂರಿನಲ್ಲಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸತೀಶ್ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.
ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್ನಲ್ಲಿ ಜಾಮೀನು ಪಡೆದುಕೊಂಡಿದ್ದರು.
ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಆನಂತರ ಜೈಲು ಪಾಲಾಗಿದ್ದ ಅವರು ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು.
ನಂತರ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸತೀಶ್ ಸೈಲ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನವೆಂಬರ್ನಲ್ಲಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಸತೀಶ್ ಸೈಲ್ಗೆ ವಿಧಿಸಿರುವ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಡಲು ಸೂಚಿಸಿತ್ತು. ದಂಡ ಮೊತ್ತದ ಶೇ.25 ರಷ್ಟನ್ನು ಠೇವಣಿ ಇಡುವಂತೆ ಸೂಚನೆ ನೀಡಿದ್ದ ಹೈಕೋರ್ಟ್ ಸತೀಶ್ ಸೈಲ್ಗೆ ಜಾಮೀನು ನೀಡಿತ್ತು.

