ಕಾರವಾರ, ಆಗಸ್ಟ್ 15: ಉತ್ತರಕನ್ನಡ ಜಿಲ್ಲೆಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದಲ್ಲಿ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ 2 ದಿನಗಳಿಂದ ಶೋಧ ಕಾರ್ಯ ನಡೆಸಿದ್ದರು. ಈ ಶೋಧದ ವೇಳೆ ಇಡಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಹಚ್ಚಿದ್ದಾರೆ.
ಶಾಸಕ ಸತೀಶ್ ಸೈಲ್ ಮನೆ ಮತ್ತು ಬ್ಯಾಂಕ್ ಖಾತೆಯಲ್ಲಿದ್ದ 1.68 ಕೋಟಿ ರೂಪಾಯಿ ನಗದು ಮತ್ತು ಅಂದಾಜು 6,20,45,319 ರೂ. ಮೌಲ್ಯದ 6.75 ಕೆಜಿ ಚಿನ್ನವನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಚರಾಸ್ತಿ, ಸ್ಥಿರಾಸ್ತಿ ಸೇರಿ ಒಟ್ಟು 14.13 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ಸತೀಶ್ ಸೈಲ್ ಮನೆಯಲ್ಲಿ ಜಪ್ತಿ ಮಾಡಿದ್ದಾರೆ. ಇಡಿ ಅಧಿಕಾರಿಗಳು 2 ಟ್ರಂಕ್ನಲ್ಲಿ ಚಿನ್ನ, ಹಣ, ದಾಖಲೆ ಕೊಂಡೊಯ್ದಿದ್ದಾರೆ. ಇಡಿ ಶೋಧದ ವೇಳೆ ಹಣಕಾಸು, ದೋಷಾರೋಪ ದಾಖಲೆ, ಇ-ಮೇಲ್ ಹಾಗೂ ಇತರ ದಾಖಲೆಗಳು ಪತ್ತೆಯಾಗಿದ್ದವು.

ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣ
ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಶಾಸಕ ಸತೀಶ್ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಶಾಸಕ ಸತೀಶ್ ಸೈಲ್ಗೆ ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್ನಲ್ಲಿ ಜಾಮೀನು ಪಡೆದುಕೊಂಡಿದ್ದರು.
ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂ.ಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಬಳಿಕ ಜೈಲು ಪಾಲಾಗಿದ್ದ ಸತೀಶ್ ಸೈಲ್ ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು.
ನಂತರ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸತೀಶ್ ಸೈಲ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನವೆಂಬರ್ನಲ್ಲಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಸೈಲ್ಗೆ ವಿಧಿಸಿರುವ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಡಲು ಸೂಚಿಸಿತ್ತು. ದಂಡ ಮೊತ್ತದ ಶೇ.25 ರಷ್ಟನ್ನು ಠೇವಣಿ ಇಡುವಂತೆ ಸೂಚನೆ ನೀಡಿದ್ದ ಹೈಕೋರ್ಟ್ ಸತೀಶ್ ಸೈಲ್ಗೆ ಜಾಮೀನು ನೀಡಿತ್ತು.

