ಬೆಂಗಳೂರು, ಆಗಸ್ಟ್ 16: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಸೇರಿದ್ದಾರೆ. ಈ ಬಾರಿ ಅವರ ಜೈಲು ವಾಸ ತುಸು ಸುದೀರ್ಘವಾಗಿಯೇ ಇರಲಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲ ಆರೋಪಿಗಳ ಜಾಮೀನು ರದ್ದಾಗಿದ್ದು ಎಲ್ಲರೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಕಳೆದ ಗುರುವಾರ ರಾತ್ರಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಜೈಲು ಸೇರಿದ ಎರಡೇ ದಿನಕ್ಕೆ ಜೈಲಿನಿಂದಲೇ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪತಿ ದರ್ಶನ್ ಕಳಿಸಿರುವ ಸಂದೇಶವನ್ನು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ‘ಎಲ್ಲರಿಗೂ ನಮಸ್ಕಾರ, ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ರವರು ನಿಮಗೆ ಕಳಿಸಿರುವ ಸಂದೇಶ’ ಎಂದು ವಿಜಯಲಕ್ಷ್ಮಿ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ, ಮುಂದುವರೆದು, ದರ್ಶನ್ ಅವರ ಸಂದೇಶವನ್ನು ಪ್ರಕಟಿಸಿದ್ದಾರೆ. ‘ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೇ ಇದ್ದರೂ ಹೇಗೆ ಇದ್ದರೂ ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರೂ, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೋಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ “ ದಿ ಡೆವಿಲ್ “ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿ ನಂಬಿದ್ದೇನೆ. ಸಿನಿಮಾ ಒಂದು ಮನರಂಜನೆಯ ಮಾಧ್ಯಮ. ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು. ಇಂತಿ ನಿಮ್ಮ ಪ್ರೀತಿಯ ದಾಸ’ ಎಂದು ದರ್ಶನ್ ಸಂದೇಶ ನೀಡಿದ್ದಾರೆ.
ಈ ಸಂದೇಶದ ಮೂಲಕ ‘ಡೆವಿಲ್’ ಸಿನಿಮಾ ಕೆಲವೇ ವಾರಗಳಲ್ಲಿ ಬಿಡುಗಡೆ ಆಗಲಿದೆ. ತಾವು ಒಳಗಿದ್ದರೂ, ಹೊರಗಿದ್ದರೂ ಸಿನಿಮಾ ಅನ್ನು ಗೆಲ್ಲಿಸುವಂತೆ ಪರೋಕ್ಷವಾಗಿ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ದರ್ಶನ್ ನಟಿಸಿರುವ ‘ಡೆವಿಲ್’ ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಆದರೆ ಆ ವೇಳೆಗೆ ದರ್ಶನ್ ಜೈಲಿನಲ್ಲೇ ಇರುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಸಿನಿಮಾ ಮೇಲೆ ಬಂಡವಾಳ ಹಾಕಿ ವರ್ಷಗಳಿಂದಲೂ ಕಾಯುತ್ತಿರುವ ನಿರ್ಮಾಪಕರು, ಮತ್ತೆ ದರ್ಶನ್ ಬಿಡುಗಡೆ ಆಗುವವರೆಗೆ ಕಾಯಲಾರರು, ಹೀಗಾಗಿ ನಿಗದಿತ ದಿನಾಂಕದಂತೆ ಬಹುನಿರೀಕ್ಷಿತ ‘ಡೆವಿಲ್’ ಸಿನಿಮಾ ಬಿಡುಗಡೆಗೆ ಮುಂದಾಗಿದ್ದಾರೆ.
ಈ ಹಿಂದೆ ದರ್ಶನ್ ನಟನೆಯ ‘ಸಾರಥಿ’ ಸಿನಿಮಾ ಸಹ ದರ್ಶನ್ ಜೈಲಿನಲ್ಲಿರುವಾಗಲೇ ಬಿಡುಗಡೆ ಆಗಿತ್ತು. ಪತ್ನಿ ವಿಜಯಲಕ್ಷ್ಮಿ ಮೇಲೆ ದಾರುಣವಾಗಿ ದರ್ಶನ್ ಹಲ್ಲೆ ಮಾಡಿದ್ದರು. ಆ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿತ್ತು. ಅವರ ಬಂಧನವಾದ ಮರುದಿನ ‘ಸಾರಥಿ’ ಸಿನಿಮಾ ಬಿಡುಗಡೆ ಆಯ್ತು, ‘ಸಾರಥಿ’ ಸಿನಿಮಾ ಬ್ಲಾಕ್ ಬಸ್ಟರ್ ಸಹ ಆಯ್ತು.

