Headlines

ಉತ್ತಮ ಮಳೆಯಾದ್ರೂ ರಸಗೊಬ್ಬರದ ಕೊರತೆ: ಇಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ

ಬೆಂಗಳೂರು, ಜುಲೈ 28: ಕರ್ನಾಟಕದಾದ್ಯಂತ ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗೆ ನಿರಂತರ ಮಳೆಯಿಂದ ಇಳೆ ಕಂಗೊಳಿಸುತ್ತಿದೆ. ಪರಿಣಾಮ ವರುಣನ ಕೃಪೆಗೆ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ. ಉತ್ಕೃಷ್ಟ ಬೆಳೆಯ ನಿರೀಕ್ಷೆಯಲ್ಲಿರುವ ರೈತ, ಈ ಬಾರಿ ಉತ್ತಮ ಫಸಲು ತೆಗೆಯುವ ಕನಸು ಹೊತ್ತು ಹೆಜ್ಜೆ ಇಟ್ಟಿದ್ದಾನೆ. ಹೀಗೆ ಹೆಜ್ಜೆ ಇಟ್ಟ ಅನ್ನದಾತನಿಗೆ ರಸಗೊಬ್ಬರ ಕೊರತೆಯ ಕಲ್ಲು ಎದೆಗೆ ಬಡಿದಿದೆ. ಎಲ್ಲಿ ಹೋದರೂ ‘‘ನೋ ಸ್ಟಾಕ್’’ ಬೋರ್ಡ್!!!

ಕಾಂಗ್ರೆಸ್, ಬಿಜೆಪಿ ಮಧ್ಯೆ ಗೊಬ್ಬರ ಗುದ್ದಾಟ…
ಮಳೆ ಬಂದ್ರೂ ಗೊಬ್ಬರವಿಲ್ಲ, ಬೆಳೆ ಕೈತಪ್ಪುವ ಭಯ, ಬಿತ್ತನೆ ಸಮಯ ಮುಗಿದು ಹೋಗುವ ಭೀತಿ. ಕೇಂದ್ರ ಗೊಬ್ಬರ ಪೂರೈಸಿದರೂ ರಾಜ್ಯಸರ್ಕಾರ ಕೊಡುತ್ತಿಲ್ಲವೇ? ರಾಜ್ಯಸರ್ಕಾರಕ್ಕೆ ಕೇಂದ್ರದಿಂದಲೇ ಸರಬರಾಜು ಆಗುತ್ತಿಲ್ಲವೇ? ಏನೇನೂ ಮಾಹಿತಿ ಸಿಗದ ರೈತ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾನೆ. ಅನ್ನದಾತನ ಭಯಕ್ಕೆ ಆತ್ಮಸ್ಥೈರ್ಯ ತುಂಬಬೇಕಿದ್ದ ನಾಯಕರು ಗೊಬ್ಬರ ಕೊರತೆ ವಿಚಾರವಾಗಿ ಗುದ್ದಾಟದಲ್ಲಿ ತೊಡಗಿದ್ದಾರೆ.

ರಸಗೊಬ್ಬರ ಪೂರೈಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಬರೆದಿರುವ ಪತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಿಗಿ ನಿಗಿ ಕೆಂಡವಾಗಿದ್ದಾರೆ. ಮಳೆ ಬರುವ ಮೊದಲೇ ಪ್ರಧಾನಿ ಮೋದಿಗೆ ಪತ್ರ ಬರೆಯಬೇಕಿತ್ತು ಎಂದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಸಚಿವ ಪರಮೇಶ್ವರ್, ಕೇಂದ್ರದಿಂದಲೇ ಗೊಬ್ಬರ ಪೂರೈಕೆಯಾಗಿಲ್ಲ ಎಂದಿದ್ದಾರೆ. ಇದಕ್ಕೆ ಪಂಚ್ ಕೊಟ್ಟ ವಿಜಯೇಂದ್ರ, 2.5 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಎಲ್ಲಿ ಹೋಯಿತು? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ…
ರಾಜ್ಯಸರ್ಕಾರವೇ ರಸಗೊಬ್ಬರ ಕೊರತೆಗೆ ಕಾರಣ ಎಂದು ಆರೋಪಿಸುತ್ತಿರುವ ಬಿಜೆಪಿ, ರೈತರ ಸಂಕಷ್ಟವನ್ನು ಮುಂದಿಟ್ಟು ಹೋರಾಟಕ್ಕೆ ಮುಂದಾಗಿದೆ. ಇಂದು ರಾಜ್ಯಾದ್ಯಂತ ಹೋರಾಟಕ್ಕಿಳಿಯಲಿದೆ. ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಜಿಲ್ಲೆ ಜಿಲ್ಲೆಯಲ್ಲೂ ಪ್ರತಿಭಟಿಸಲಿದ್ದಾರೆ.

ಕೊಪ್ಪಳ ತಾಲೂಕಿನ ಕುಣಕೇರಿ ತಾಂಡಾದ ರೈತ ಚಂದ್ರಪ್ಪ, ಗೊಬ್ಬರಕ್ಕೋಸ್ಕರ ಮಣ್ಣು ತಿಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ರಾಜ್ಯ ಬಿಜೆಪಿ ತಂಡ ಇಂದು ರೈತರಾದ ಚಂದ್ರಪ್ಪನವರ ಮನೆಗೆ ಭೇಟಿ ನೀಡಲಿದೆ. ರೈತ ಮೋರ್ಚಾ ರಾಜ್ಯಾಧ್ಯಕ್ಷ ಎಎಸ್ ಪಾಟೀಲ್ ನಡಹಳ್ಳಿ ನೇತೃತ್ವದ ನಿಯೋಗ ಭೇಟಿ ನೀಡಿ ರೈತನಿಗೆ ನ್ಯಾಯ ದೊರಕಿಸಿಕೊಡಲಿದೆ.

ಕಡ್ಡಾಯ ನಿಯಮವೇ ರಸಗೊಬ್ಬರ ಕೊರತೆಗೆ ಕಾರಣವಾಯ್ತಾ?


ಅಂದಹಾಗೆ ಯೂರಿಯಾ ಜೊತೆ ನ್ಯಾನೋ ಯೂರಿಯಾ ಖರೀದಿ ಮಾಡಬೇಕೆಂಬ ಕಡ್ಡಾಯ ನಿಮಯವಿದೆ. ಆದರೆ, ರೈತರು ನ್ಯಾನೋ ಯೂರಿಯಾ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಯೂರಿಯಾವನ್ನು ನಾವು ಮಾರಾಟ ಮಾಡುತ್ತಿಲ್ಲ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ನ್ಯಾನೋ ಯೂರಿಯಾ ಕಡ್ಡಾಯ ನಿಯಮ ಹಿಂಪಡೆಯಲು ಮನವಿ ಮಾಡಿದ್ದಾರೆ.

ಕಾರಣಗಳೇನೇ ಇರಲಿ, ಸಮಸ್ಯೆಯ ಮೂಲ ಕಾರಣವನ್ನು ನಾಯಕರು ಹುಡುಕಬೇಕಿದೆ. ಎಲ್ಲಿ ಸಮಸ್ಯೆ ಆಗಿದೆ ಎಂಬುದನ್ನು ಪತ್ತೆ ಹಚ್ಚಿ ಪರಿಹಾರ ನೀಡಬೇಕಿದೆ. ಆದರೆ ಇದ್ಯಾವುದಕ್ಕೂ ಆಡಳಿತ ಪಕ್ಷದ ಕೈ ನಾಯಕರು ಮುಂದಾದಂತೆ ಕಾಣಿಸುತ್ತಿಲ್ಲ.

Leave a Reply

Your email address will not be published. Required fields are marked *

error: Content is protected !!