Headlines

ಸಂಸದ ತೇಜಸ್ವಿಸೂರ್ಯ ವಿರುದ್ಧದ ಸುಳ್ಳು ಸುದ್ದಿ ಪ್ರಕರಣ ವಜಾ: ರಾಜ್ಯಸರ್ಕಾರಕ್ಕೆ ಮುಖಭಂಗ

ನವದೆಹಲಿ, ಜುಲೈ 21: ಹಾವೇರಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆಯೂ ಸುಳ್ಳು ಸುದ್ದಿ ಹಬ್ಬಿಸಿದರೆಂದು ಆರೋಪಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಈ ಮೂಲಕ ಬಿಜೆಪಿ ಸಂಸದ ತೇಜಸ್ವಿಸೂರ್ಯಗೆ ಬಿಗ್​ ರಿಲೀಫ್​ ಸಿಕ್ಕಿದೆ. ಜೊತೆಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ ಉಂಟಾಗಿದೆ.

ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠ ವಿಚಾರಣೆ ಮಾಡಿದ್ದು, ನ್ಯಾಯಾಂಗ ವೀಕ್ಷಣೆಗೆ ಒಳಪಟ್ಟ ವಿಷಯವಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿಸೂರ್ಯಗೆ ರಿಲೀಫ್ ಸಿಕ್ಕಿದೆ.
ಕರ್ನಾಟಕ ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

ಇನ್ನು ವಿಚಾರಣೆ ವೇಳೆ ಗರಂ ಆದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ನ್ಯಾಯಾಲಯದ ಹೊರಗೆ ಈ ಹೋರಾಟಗಳನ್ನು ಮಾಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ…
ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ‌ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಡಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ 2024ರ ನವೆಂಬರ್‌ 14ರಂದು ಎಫ್ಐಆರ್ ದಾಖಲಾಗಿತ್ತು. ಈ ಬಗ್ಗೆ 2024 ನವೆಂಬರ್ 8ರಂದು, ಸಂಸದ ತೇಜಸ್ವಿಸೂರ್ಯ ತಮ್ಮ ಟ್ವೀಟರ್​ನಲ್ಲಿ ರಾಜ್ಯದ ಓರ್ವ ರೈತ ತನ್ನ ಭೂಮಿಯನ್ನು ವಕ್ಫ್ ಮಂಡಳಿಯು ವಶಪಡಿಸಿಕೊಂಡ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಸ್ಟ್ ಮಾಡಿದ್ದರು.

‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ಇಂತಹ ದುರಂತಗಳು ಸಂಭವಿಸುತ್ತಿವೆ. ಪ್ರತಿದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಸಂಸದ ತೇಜಸ್ವಿಸೂರ್ಯ ತಮ್ಮ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದರು. ಬಳಿಕ ಟ್ವೀಟ್​ ಅನ್ನು ಅಳಿಸಿಹಾಕಲಾಗಿತ್ತು.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 353(2) ರ ಅಡಿಯಲ್ಲಿ ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಹಾವೇರಿ ಸೈಬರ್ ಅಪರಾಧ, ಆರ್ಥಿಕ ಮತ್ತು ಮಾದಕವಸ್ತು ಅಪರಾಧಗಳ ಪೊಲೀಸರು ಸಂಸದ ತೇಜಸ್ವಿಸೂರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದರು. 2024ರ ಡಿಸೆಂಬರ್​ನಲ್ಲಿ ಈ ಪ್ರಕರಣವನ್ನು ರದ್ದುಗೊಳಿಸಲಾಗಿತ್ತು. ಬಳಿಕ ರಾಜ್ಯಸರ್ಕಾರ ಹೈಕೋರ್ಟ್​ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

Leave a Reply

Your email address will not be published. Required fields are marked *

error: Content is protected !!