ಬೆಂಗಳೂರು, ಜುಲೈ 8: ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರಾಜ್ಯಸರ್ಕಾರ ಸ್ಥಗಿತಗೊಳಿಸಿತ್ತು. ಇದಕ್ಕೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಅಲ್ಲದೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು (ಜುಲೈ 8) ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧ ಕೇಂದ್ರಗಳ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ಹೊರಡಿಸಿದೆ.
ಜನೌಷಧ ಕೇಂದ್ರ ತೆರೆಯಲು ಮೂಲಸೌಕರ್ಯ ಕಲ್ಪಿಸಲು ವೆಚ್ಚವಾಗಿದೆ. ಜನರಿಗೆ ಶೇ.50ರಿಂದ ಶೇ.90ರ ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಸರ್ಕಾರದ ಆದೇಶದಿಂದ ತಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆವರೆಗೆ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ನೀಡಿದೆ.
ರಾಜ್ಯ ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಅಂದರೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಮಾತ್ರ ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದೇಶ ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿಗಳ ಕೈಸೇರಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಪಿಎಂ ಜನೌಷಧ ಕೇಂದ್ರಗಳು ಬಾಗಿಲು ಮುಚ್ಚಿವೆ. ಇದಕ್ಕೆ ಬಿಜೆಪಿ ಸೇರಿದಂತೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಡವರಿಗೆ ಕಡಿಮೆ ದರದಲ್ಲಿ ನೀಡುವ ಜನೌಷಧ ಕೇಂದ್ರಗಳನ್ನು ಮುಚ್ಚುವುದು ಸರಿಯಲ್ಲ. ಆದ್ದರಿಂದ ರಾಜ್ಯಸರ್ಕಾರದ ಆದೇಶವನ್ನು ವಾಪಸ್ ಪಡೆಯಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದವು.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ಹೊರಗಡೆಯಿಂದ ತರುವಂತೆ ರೋಗಿಗಳಿಗೆ ಸಲಹಾ ಚೀಟಿಗಳನ್ನು ನೀಡುವುದನ್ನು ರಾಜ್ಯಸರ್ಕಾರ ನಿಷೇಧಿಸಿದೆ. ಈ ಮೂಲಕ ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ತರಹದ ಔಷಧಿಗಳನ್ನು ಹೊರಗೆ ಖರೀದಿಸುವಂತೆ ಶಿಫಾರಸ್ಸು ಮಾಡದಂತೆ ನೋಡಿಕೊಳ್ಳುವುದು ಸರ್ಕಾರದ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನಲ್ಲಿನ ಜನೌಷಧಿ ಕೇಂದ್ರಗಳನ್ನು ತೆರೆಯುವುದು ರಾಜ್ಯಸರ್ಕಾರದ ನೀತಿಗೆ ವಿರುದ್ಧವಾಗಿದೆ. ಈ ಕಾರಣದಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಭಾರತೀಯ ಔಷಧ ಮಂಡಳಿಯು(ಬಿಪಿಪಿಐ) ಜನೌಷಧ ಕೇಂದ್ರಗಳಿಗೆ ನೋಡಲ್ ಸಂಸ್ಥೆಯಾಗಿದೆ. ಸದ್ಯ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಲು, ಒಪ್ಪಂದದ ನಿಯಮಗಳ ಅನುಸಾರ ಕ್ರಮಕೈಗೊಳ್ಳಬೇಕು ಎಂದು ಹೇಳಲಾಗಿದೆ. ಅಲ್ಲದೇ ಪರಿಶೀಲನೆ ಹಂತದಲ್ಲಿರುವ 31 ಜನೌಷಧ ಕೇಂದ್ರಗಳ ಅರ್ಜಿಗಳಿಗೆ ಅನುಮತಿ ನೀಡದಂತೆ ಆರೋಗ್ಯ ಇಲಾಖೆಗೆ ರಾಜ್ಯಸರ್ಕಾರ ಸೂಚನೆ ನೀಡಿತ್ತು. ಆದ್ರೆ, ಇದೀಗ ರಾಜ್ಯಸರ್ಕಾರದ ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಪರಿಣಾಮ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರದ ರಾಜಕೀಯ ದುರುದ್ದೇಶವನ್ನು ಹೈಕೋರ್ಟ್ ತಡೆ ನೀಡಿ ಜನಪ್ರಿಯ ಅತ್ಯವಶ್ಯಕ ಔಷಧೀಯ ಸೌಲಭ್ಯವನ್ನು ಕರ್ನಾಟಕದ ಪ್ರಜೆಗಳಿಗೆ ನೀಡಿದಂತಾಗಿದೆ.

