Headlines

ಕೆ.ಆರ್ ನಗರ ಮಹಿಳೆಯ ಕಿಡ್ನ್ಯಾಪ್-ರೇಪ್ ಆರೋಪದ ಕೇಸ್: ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು!

ಬೆಂಗಳೂರು, ಆಗಸ್ಟ್ 1: ಮೈಸೂರಿನ ಕೆ.ಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣವಿರುದ್ಧ ತೀರ್ಪು ಪ್ರಕಟಿಸಿದೆ.
ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.

ಹಾಗಾದರೆ ಈ ಪ್ರಕರಣದಲ್ಲಿ ತಪ್ಪಿತಸ್ಥ ಅಪರಾಧಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? ಎಂಬುದನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ. ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ.

ಕಣ್ಣೀರೊರೆಸುತ್ತಾ ಕೋರ್ಟ್ ಹಾಲ್​ನಿಂದ ನಿರ್ಗಮಿಸಿದ ಪ್ರಜ್ವಲ್ ರೇವಣ್ಣ…
ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟರು. ಕಣ್ಣೀರು ಒರೆಸುತ್ತಲೇ ಪ್ರಜ್ವಲ್ ರೇವಣ್ಣ ಅಲ್ಲಿಂದ ತೆರಳಿದರು.

ಜುಲೈ 30 ರಂದು ಪ್ರಕಟವಾಗಬೇಕಿದ್ದ ತೀರ್ಪು
ಕೆ.ಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜುಲೈ 30 ರಂದೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಬೇಕಿತ್ತು. ಆದರೆ, ಕೆಲವೊಂದು ಸ್ಪಷ್ಟೀಕರಣ ಬೇಕಿದ್ದರಿಂದ ತೀರ್ಪನ್ನು ಕಾಯ್ದಿರಿಸುತ್ತಿರುವುದಾಗಿ ಜಡ್ಜ್ ತಿಳಿಸಿದ್ದರು.

ಕೋರ್ಟ್ ಕೇಳಿದ ಸ್ಪಷ್ಟೀಕರಣ ಏನು?
ಪ್ರಾಸಿಕ್ಯೂಷನ್ ಹಾಗೂ ಆರೋಪಿಗಳ ಪರ ವಕೀಲರು ಗೂಗಲ್ ಮ್ಯಾಪ್ ಅನ್ನು ಕೂಡಾ ಸಾಕ್ಷ್ಯವನ್ನಾಗಿಸಿ ವಾದ ಮಂಡಿಸಿದ್ದಾರೆ. ಗೂಗಲ್ ಕಂಪನಿಯ ದೃಢೀಕರಣವಿಲ್ಲದೇ ಸಲ್ಲಿಸಿರುವ ಮ್ಯಾಪ್ ಅನ್ನು ಸಾಕ್ಷಿಯನ್ನಾಗಿ ಪರಿಗಣಿಸಬಹುದೇ ಎಂದು ನ್ಯಾಯಾಲಯ ಸ್ಪಷ್ಟನೆ ಕೇಳಿತ್ತು. ಇದಕ್ಕೆ ಉತ್ತರ ನೀಡಿದ್ದ ಎಸ್​​ಪಿ, ಅತ್ಯಾಚಾರ ನಡೆದ ಹೊಳೆನರಸೀಪುರ ಫಾರ್ಮ್‌ ಹೌಸ್​​​ನ ಅಕ್ಷಾಂಶ ಹಾಗೂ ರೇಖಾಂಶವನ್ನು ಮಹಜರು ದಾಖಲೆಯಲ್ಲಿ ನಮೂದಿಸಿ ಸಲ್ಲಿಸಲಾಗಿದೆ. ಈ ಅಕ್ಷಾಂಶ ರೇಖಾಂಶಗಳನ್ನು ಕ್ಲಿಕ್ ಮಾಡಿದರೆ ಗೂಗಲ್ ಮ್ಯಾಪ್​​ನಲ್ಲಿ ಫಾರ್ಮ್ ಹೌಸ್ ಲೊಕೇಷನ್ ಹಾಗೂ 2021ರ ಫೋಟೋ ಸಿಗಲಿದೆ. ಹೀಗಾಗಿ ಇದನ್ನೂ ದಾಖಲೆಯ ಭಾಗವೆಂದು ಪರಿಗಣಿಸಬೇಕು ಎಂದು ಮನವಿ ಮಾಡಿದರು.

ವಶಕ್ಕೆ ಪಡೆಯಲಾದ ಸ್ಯಾಮ್ಸಂಗ್ ಜೆ 4 ಆ್ಯಂಡ್ರಾಯ್ಡ್ ಮೊಬೈಲ್ ಫೋನ್ ಅನ್ನು ತನಿಖಾಧಿಕಾರಿ ಈ ಕೇಸಿನಲ್ಲಿ ಜಪ್ತಿ ಮಾಡಿರುವ ಬಗ್ಗೆ ಸ್ಪಷ್ಟೀಕರಣ ಬೇಕಿದೆ ಎಂದು ಕೋರ್ಟ್ ಕೇಳಿತ್ತು. ಇದಕ್ಕೆ ಪ್ರಜ್ವಲ್ ರೇವಣ್ಣ ಪರ ವಕೀಲ ವಿಪಿನ್ ಕುಮಾರ್ ಜೈನ್ ಉತ್ತರಿಸಿ, ಬೇರೊಂದು ಕೇಸ್​ನಲ್ಲಿ ವಶಕ್ಕೆ ಪಡೆದ ಮೊಬೈಲ್ ಅನ್ನು ತನಿಖಾಧಿಕಾರಿ ಈ ಕೇಸಿನಲ್ಲಿ ವಶಕ್ಕೆ ಪಡೆದಿಲ್ಲ. ಎಫ್‌ಎಸ್‌ಎಲ್​ನಿಂದ ಅವರು ಸ್ವೀಕರಿಸುವ ಬಗ್ಗೆಯಾಗಲೀ ದಾಖಲೆಯಿಲ್ಲ. ಹೀಗಾಗಿ ಮೊಬೈಲ್ ತನಿಖಾಧಿಕಾರಿ ಬಳಿಯಲ್ಲಿರಲೇ ಇಲ್ಲ. ಹೀಗಾಗಿ ಈ ಸಾಕ್ಷ್ಯಕ್ಕೆ ಬೆಲೆಯಿಲ್ಲ ಎಂದು ವಾದ ಮಂಡಿಸಿದ್ದರು.

ಏನಿದು ಪ್ರಕರಣ?
ಸರಣಿ ಅತ್ಯಾಚಾರ ಎಸಗಿರುವ ಆರೋಪ ಪ್ರಜ್ವಲ್ ರೇವಣ್ಣ ಮೇಲಿದ್ದು, ಇದರಲ್ಲಿ ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣಗಳನ್ನು ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ತಂದೆತಾಯಿಗಳಾದ ಮಾಜಿ ಸಚಿವ ಹೆಚ್​.ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ.

ಕೆ.ಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಈಗಾಗಲೇ ಜಾಮೀನು ದೊರೆತಿದೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು.

Leave a Reply

Your email address will not be published. Required fields are marked *

error: Content is protected !!