Headlines

ಕರೂರು ಕಾಲ್ತುಳಿತ ಕೇಸ್: ವಿಜಯ್ ವಿರುದ್ಧ ಕಿಡಿ ಕಾರಿ ಎಸ್ಐಟಿ ತನಿಖೆಗೆ ಆದೇಶಿಸಿದ ಹೈಕೋರ್ಟ್

ಚೆನೈ, ಅಕ್ಟೋಬರ್ 3: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕರ ವಿರುದ್ಧ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕಾಲ್ತುಳಿತದಿಂದ ಜನರು ಸಾವನ್ನಪ್ಪಿದರೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಆ ಘಟನಾ ಸ್ಥಳದಿಂದ ಪಲಾಯನ ಮಾಡಿದ್ದಾರೆ. ಆ ಘಟನೆಯ ಬಗ್ಗೆ ಟಿವಿಕೆ ಪಕ್ಷವು ಸ್ವಲ್ಪವೂ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ದುರ್ಘಟನೆಯ ತನಿಖೆಗಾಗಿ ಹಿರಿಯ ಐಪಿಎಸ್ ಅಧಿಕಾರಿ ಆಸ್ರಾ ಗರ್ಗ್ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕೋರ್ಟ್ ಆದೇಶಿಸಿದೆ.

ಕಾಲ್ತುಳಿತದ ಸಮಯದಲ್ಲಿ ಆ ಜಾಗದಿಂದ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಓಡಿಹೋಗಿದ್ದಾರೆ. ಇದು ಆ ನಟ-ರಾಜಕಾರಣಿಯ ಮಾನಸಿಕ ಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಮದ್ರಾಸ್ ಹೈಕೋರ್ಟ್ ಕಿಡಿ ಕಾರಿದೆ. 41 ಜೀವಗಳನ್ನು ಬಲಿ ಪಡೆದ ಕಾಲ್ತುಳಿತವನ್ನು ತಪ್ಪಾಗಿ ನಿರ್ವಹಿಸಲಾಗಿದೆ ಎಂದು ನ್ಯಾಯಮೂರ್ತಿ ಸೆಂಥಿಲ್‌ಕುಮಾರ್ ಹೇಳಿದ್ದಾರೆ. ತಮಿಳುನಾಡು ರಾಜ್ಯವು ವಿಜಯ್ ಕಡೆಗೆ ಮೃದು ಧೋರಣೆ ತಳೆದಿದೆ ಎಂದು ಅವರು ಟೀಕಿಸಿದ್ದಾರೆ.

ನ್ಯಾಯಮೂರ್ತಿ ಸೆಂಥಿಲ್‌ಕುಮಾರ್ ಆ ರ‍್ಯಾಲಿಯ ಆಯೋಜಕರು ಮತ್ತು ಪೊಲೀಸರನ್ನು ಅವರ ಜವಾಬ್ದಾರಿಯ ಬಗ್ಗೆ ಪ್ರಶ್ನಿಸಿದ್ದಾರೆ. “ಈ ಕಾರ್ಯಕ್ರಮದ ಆಯೋಜಕರಾಗಿ ನಿಮಗೆ ಯಾವುದೇ ಜವಾಬ್ದಾರಿ ಇಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಸಾವನ್ನಪ್ಪಿದಾಗ ವಿಜಯ್ ವಿಮಾನದಲ್ಲಿ ಪಲಾಯನ ಮಾಡಿದ ನಡವಳಿಕೆಯನ್ನು ಕೋರ್ಟ್ ಬಲವಾಗಿ ಖಂಡಿಸಿತು.

ಟಿವಿಕೆ ನಾಯಕರಾದ ಬುಸ್ಸಿ ಆನಂದ್ ಮತ್ತು ಸಿ.ಟಿ.ಆರ್ ನಿರ್ಮಲ್ ಕುಮಾರ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಗಳ ಮೇಲಿನ ಆದೇಶಗಳನ್ನು ಮದ್ರಾಸ್ ಹೈಕೋರ್ಟ್ ನ್ಯಾಯಪೀಠ ಕಾಯ್ದಿರಿಸಿದೆ.

ತಮಿಳುನಾಡು ಸರ್ಕಾರ ಹೇಳಿದ್ದಿಷ್ಟು…
ತಮಿಳುನಾಡು ಸರ್ಕಾರವು ಮರ ಬಿದ್ದ ಕಾರಣ ಕಾಲ್ತುಳಿತ ಸಂಭವಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರನ್ನು ಟೀಕಿಸಿದ ತಮಿಳುನಾಡಿನ ಸರ್ಕಾರ, ನಟ-ರಾಜಕಾರಣಿ ಅವರ ರೋಡ್ ಶೋ ಹಲವಾರು ಷರತ್ತುಗಳನ್ನು ಉಲ್ಲಂಘಿಸಿದೆ ಎಂದು ಹೇಳಿದೆ. ಆದರೆ, ತಮಿಳುನಾಡು ಸರ್ಕಾರ ವಿಜಯ್ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದರೆ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿತ್ತು. ಹೀಗಾಗಿ, ಅನುಮತಿ ನೀಡಲಾಯಿತು ಎಂದು ಹೇಳಿದೆ.

ಆ ಸಭೆಯಲ್ಲಿ ಮಕ್ಕಳೂ ಇದ್ದರು. ಆದರೆ ಆಯೋಜಕರು ಅವರಿಗೆ ಯಾವುದೇ ವ್ಯವಸ್ಥೆ ಮಾಡಿರಲಿಲ್ಲ. ಒಂದು ನೀರಿನ ಬಾಟಲಿಯೂ ಲಭ್ಯವಿರಲಿಲ್ಲ. ಪೊಲೀಸರು ಕುಡಿಯುವ ನೀರು ನೀಡಲು ಸಾಧ್ಯವಿಲ್ಲ, ಆಯೋಜಕರೇ ಅದನ್ನು ಮಾಡಬೇಕು. ಟಿವಿಕೆ ಕಾರ್ಯಕರ್ತರ ನಡವಳಿಕೆಯಿಂದಾಗಿ ಕಾಲ್ತುಳಿತ ಉಂಟಾಗಿದೆ. ಟಿವಿಕೆ ಪಕ್ಷದ ನಾಯಕರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಸ್ಟಾಲಿನ್ ಸರ್ಕಾರ ಹೇಳಿದೆ.

Leave a Reply

Your email address will not be published. Required fields are marked *

error: Content is protected !!