ಹೊಸಪೇಟೆ, ಆಗಸ್ಟ್ 15: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 7 ಗೇಟ್ಗಳು ಬೆಂಡ್ ಆಗಿವೆ ಎಂದು ಡ್ಯಾಂ ಸೇಫ್ಟಿ ರೀವಿವ್ ಕಮಿಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ತುಂಗಭದ್ರಾ ಜಲಾಶಯದ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್ ಸೇರಿದಂತೆ 7 ಗೇಟ್ಗಳು ಬೆಂಡ್ ಆಗಿವೆ. ಇದರಲ್ಲಿ, 6 ಗೇಟ್ಗಳನ್ನು ಮೇಲೆ ಎತ್ತಲು ಹಾಗೂ ಇಳಿಸಲು ಆಗುತ್ತಿಲ್ಲ. ಗೇಟ್ ನಂಬರ್ 4 ಅನ್ನು ಕೇವಲ 2 ಅಡಿ ಮಾತ್ರ ಮೇಲಕ್ಕೆ ಎತ್ತಬಹುದು. ಗೇಟ್ ನಂಬರ್ 4 ಸೇರಿದಂತೆ ಒಟ್ಟು 7 ಗೇಟ್ಗಳು ಡ್ಯಾಮೇಜ್ ಆಗಿವೆ ಎಂದು ತಿಳಿಸಿದರು.
ಒಂದು ಗೇಟ್ ಕೊಚ್ಚಿ ಹೋದಾಗಲೇ ಅಪಾರ ಪ್ರಮಾಣದ ನೀರು ಪೋಲಾಗಿತ್ತು. ಇದೀಗ 7 ಗೇಟ್ಗಳು ಬೆಂಡ್ ಆಗಿದ್ದು, ಯಾವಾಗ ಏನಾಗುತ್ತದೆ? ಎಂಬ ಆತಂಕ ಕಾಡುತ್ತಿದೆ. ಈ ಬಾರಿ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಕಾರಣ ಹೆಚ್ಚಿನ ಪ್ರಮಾಣದ ನೀರು ಜಲಾಶಯಕ್ಕೆ ಬಂದಿದೆ. ನೀರಿನ ಒತ್ತಡದಿಂದ ಈ 7 ಗೇಟ್ಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಕಳೆದ ವರ್ಷ ಆಗಸ್ಟ್ 10 ರಂದು ತುಂಗಭದ್ರಾ ಜಲಾಶಯದ ಗೇಟ್ ನಂಬರ್ 19 ಕೊಚ್ಚಿ ಹೋಗಿತ್ತು. ಒಂದು ವರ್ಷವಾದರೂ ಹೊಸ ಗೇಟ್ ಅಳವಡಿಸಿಲ್ಲ. ಈ ನಡುವೆ ಇದೀಗ 7 ಗೇಟ್ಗಳು ಡ್ಯಾಮೇಜ್ ಆಗಿರುವುದು ಆತಂಕಕ್ಕೆ ಕಾರಣವಾಗಿದೆ. ಗೇಟ್ ಕಿತ್ತುಹೋದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ ಶಿವಕುಮಾರ್ ಅವರುಗಳು ಟಿ.ಬಿ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಗ ಹೊಸ ಗೇಟ್ ಅಳವಡಿಸುವ ಕೆಲಸ ಆರಂಭಿಸುತ್ತೇವೆ ಎಂದು ಸಿಎಂ-ಡಿಸಿಎಂ ಇಬ್ಬರೂ ಭರವಸೆ ನೀಡಿದ್ದರು. ಆದರೆ, ಇದಾಗಿ ಒಂದು ವರ್ಷವಾದರೂ ಟಿ.ಬಿ ಡ್ಯಾಂಗೆ ಹೊಸ ಗೇಟ್ ಅಳವಡಿಸಿಲ್ಲ. ಈ ನಡುವೆ ಸಚಿವ ಶಿವರಾಜ್ ತಂಗಡಗಿ ಅವರು ಬಹಿರಂಗಪಡಿಸಿದ ಮಾಹಿತಿ 4 ಜಿಲ್ಲೆಗಳ ರೈತರನ್ನ ಚಿಂತೆಗೀಡು ಮಾಡಿದೆ.
2024ರ ಆಗಸ್ಟ್ 10 ರಂದು ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ಕಿತ್ತು ಹೋಗಿತ್ತು. ಇದರಿಂದಾಗಿ ಅಪಾರ ಪ್ರಮಾಣದ ನೀರು ಪೋಲಾಗಿತ್ತು. ಈ ವೇಳೆ ಡ್ಯಾಂನ ಎಲ್ಲಾ ಕ್ರಸ್ಟ್ ಗೇಟ್ಗಳನ್ನು ಬದಲಾವಣೆ ಮಾಡಬೇಕೆಂದು ವರದಿಯನ್ನು ತಜ್ಞರು ನೀಡಿದ್ದರು. ಆದರೆ, ರಾಜ್ಯಸರ್ಕಾರ ಮಾತ್ರ ಎಲ್ಲಾ ಗೇಟ್ ಬದಲಾವಣೆ ಇರಲಿ, ಕನಿಷ್ಠ 19ನೇ ಕ್ರಸ್ಟ್ ಗೇಟ್ಗೆ ಹೊಸ ಗೇಟ್ ಸಹ ಅಳವಡಿಸುವ ಕೆಲಸ ಸಹ ಮಾಡಿಲ್ಲ. ಇದೀಗ 7 ಗೇಟ್ಗಳು ಅಪಾಯದ ಅಂಚಿನಲ್ಲಿ ಇವೆ ಎಂಬ ವಿಚಾರ ತಿಳಿದು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯ ತುಂಗಭದ್ರಾ ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂನ 3 ಗೇಟ್ಗಳಿಂದ 13 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾದ ಹಿನ್ನಲೆ ಒಳಹರಿವು ಕಡಿಮೆಯಾಗಿದೆ. ಇಂದು 23 ಸಾವಿರ ಕ್ಯೂಸೆಕ್ ನೀರು ಹರಿದು ಬಂದಿದೆ. 33 ಗೇಟ್ಗಳಲ್ಲಿ ಕೇವಲ 3 ಗೇಟ್ಗಳ ಮೂಲಕ ನೀರು ಬಿಡಲಾಗುತ್ತಿದೆ. ನೀರು ಹೆಚ್ಚಾದರೆ ಜಲಾಶಯಕ್ಕೆ ಕಂಟಕ ತಪ್ಪಿದ್ದಲ್ಲ. ರಾಜ್ಯಸರ್ಕಾರದ ನಿರ್ಲಕ್ಷ್ಯದಿಂದ ಡ್ಯಾಂಗೆ ಹಾನಿಯುಂಟಾಗುವ ಸಾಧ್ಯತೆ ಇದೆ ಎಂದು ಗಂಗಾವತಿ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
1 ಲಕ್ಷ 50 ಸಾವಿರ ಕ್ಯೂಸೆಕ್ಸ್ ಒಳಹರಿವು ಬಂದರೆ ಟಿ.ಬಿ ಡ್ಯಾಂನ ಎಲ್ಲಾ 33 ಗೇಟ್ಗಳನ್ನು ತೆರೆಯಬೇಕಾಗುತ್ತದೆ. ತುಂಗಭದ್ರಾ ಜಲಾಶಯದ ಜಲಾಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹೆಚ್ಚಿನ ಒಳಹರಿವು ಬಂದರೆ ಎಲ್ಲ ಗೇಟ್ಗಳನ್ನು ತೆರೆಯಲು ಸಾಧ್ಯವಾಗದೆ ಡ್ಯಾಂಗೆ ಅಪಾಯವಾಗುವ ಸಾಧ್ಯತೆಗಳಿವೆ. ಹೀಗಾಗಿ ರಾಜ್ಯಸರ್ಕಾರಕ್ಕೆ ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕೆನ್ನುವುದೇ ದೊಡ್ಡ ಚಿಂತೆಯಾಗಿದ್ದು, ಕೂಡಲೇ ಈ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಮೂಲಕ ಟಿ.ಬಿ ಡ್ಯಾಂ ಅನ್ನು ಅಪಾಯದಿಂದ ಪಾರು ಮಾಡಬೇಕಿದೆ.

