Headlines

ರೈತರ ಹೋರಾಟಕ್ಕೆ ಮಣಿದ ರಾಜ್ಯಸರ್ಕಾರದಿಂದ ದೇವನಹಳ್ಳಿ ಭೂಸ್ವಾಧೀನ ರದ್ದು!

ಬೆಂಗಳೂರು, ಜುಲೈ 15: ಕೃಷಿ ಭೂಮಿಯನ್ನು ಸ್ವಾಧೀನ ಮಾಡುವ ಕ್ರಮಕ್ಕೆ ವಿರೋಧಿಸಿ ನೊಂದ ರೈತರು ನಡೆಸಿದ ಸತತ ಹೋರಾಟಕ್ಕೆ‌ ಕೊನೆಗೂ ಮಣಿದಿರುವ ರಾಜ್ಯಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಟ್ಟು ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಅಧಿಸೂಚನೆಯನ್ನು ರದ್ದುಪಡಿಸಿದೆ.

ಇದರಿಂದಾಗಿ ಕಳೆದ ಹಲವು ತಿಂಗಳಿನಿಂದ ತಮ್ಮ ಜಮೀನು ಉಳಿಸಿಕೊಳ್ಳಲು ಪ್ರತಿಭಟನೆ ನಡೆಸುತ್ತಿದ್ದ ಅನ್ನದಾತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವ ಸಭೆ ನಡೆಯಿತು.
ಈ ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಎಚ್‌.ಮುನಿಯಪ್ಪ, ಹೆಚ್‌.ಕೆ.ಪಾಟೀಲ್‌, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವೋಕೇಟ್‌ ಜನರಲ್‌ ಶಶಿಕಿರಣ ಶೆಟ್ಟಿ, ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ, ನಟ ಪ್ರಕಾಶ್‌ ರೈ, ಬಡಗಲಪುರ ನಾಗೇಂದ್ರ ಹಾಗೂ ದೇವನಹಳ್ಳಿ ಭಾಗದ ರೈತ ಮುಖಂಡರು ಭಾಗವಹಿಸಿದ್ದರು.

ಚನ್ನರಾಯಪಟ್ಟಣದಲ್ಲಿ ರಾಜ್ಯ ಸರ್ಕಾರ ಒಟ್ಟು 1777 ಎಕರೆ ಜಮೀನನಲ್ಲಿ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆ ಮಾಡಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ನಿಗಮ(ಕೆಐಎಡಿಬಿ) ಭೂಸ್ವಾಧೀನಕ್ಕೆ ಮುಂದಾಗಿತ್ತು. ಇದಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಯಾವುದೇ ಕಾರಣಕ್ಕೂ ಬೆಲೆ ಬಾಳುವ ನಮ ಜಮೀನನ್ನು ನೀಡುವುದಿಲ್ಲ ಎಂದು ಹೋರಾಟ ನಡೆಸಿದ್ದರು. 4 ಬಾರಿ ಸಭೆ ನಡೆಸಿದ್ದರೂ ಫಲಪ್ರದವಾಗಿರಲಿಲ್ಲ.

ಅಂತಿಮವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಸಚಿವರು ಹಾಗೂ ಕಾನೂನು ತಜ್ಞರ ಸಲಹೆ ಪಡೆದು ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಟ್ಟು ಹಿಂದೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವುದಾಗಿ ಖುದ್ದು ಘೋಷಣೆ ಮಾಡಿದರು. ಈ ಹಿಂದೆ ನಡೆದ ಸಭೆಯಲ್ಲಿ ಭೂಮಿ ನೀಡುವ ಸಂಬಂಧ ರೈತರಲ್ಲೇ ಎರಡು ಗುಂಪು ಸೃಷ್ಟಿಯಾಗಿತ್ತು. ಒಂದು ಗುಂಪು ಭೂಮಿ ನೀಡಲು ಒಪ್ಪಿದ್ದರೆ, ಮತ್ತೊಂದು ಗುಂಪು ಭೂಮಿ ನೀಡಲು ವಿರೋಧಿಸಿತ್ತು.

ಈ ಸಂಬಂಧ ರೈತ ಮುಖಂಡರ ಜೊತೆ ಸಭೆ ನಡೆಸಿರುವ ಸಿಎಂ, ರೈತರ ಬೇಡಿಕೆಗೆ ಸ್ಪಂದಿಸಿದ್ದಾರೆ. ಭೂಸ್ವಾಧೀನವನ್ನು ಕೈ ಬಿಟ್ಟಿದ್ದೇವೆ ಎಂದು ಸಿಎಂ ಘೋಷಿಸಿದ್ದಾರೆ. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರೈತರು ಸ್ವಯಂಪ್ರೇರಿತರಾಗಿ ಭೂಮಿ ನೀಡಲು ಮುಂದೆ ಬಂದರೆ ಒಪ್ಪಂದದ ಮೇಲೆ ತೆಗೆದುಕೊಳ್ಳುತ್ತೇವೆ. ನಮಗೆ ಕೈಗಾರಿಕೆ ಬೆಳೆಯಬೇಕು. ಭೂಮಿ ಕೊಡುವ ರೈತರಿಗೆ ಸೂಕ್ತ ಪರಿಹಾರ ಕೊಡುತ್ತೇವೆ ಎಂದು ಹೇಳಿದರು.
ಹಿಂದೆ ಮಾಡಿದ ಅಧಿಸೂಚನೆಯನ್ನು ರದ್ದು ಮಾಡುತ್ತಿದ್ದೇವೆ. ಇದನ್ನು ರೈತರು ಹಾಗೂ ಹೋರಾಟಗಾರರು ಸ್ವಾಗತಿಸಿದ್ದಾರೆ. ಬೆಂಗಳೂರಿಗೆ ಹತ್ತಿರವಾಗಿರುವುದರಿಂದ ಕೃಷಿ ಭೂಮಿ ಇರುವುದರಿಂದ ಅಧಿಸೂಚನೆ ರದ್ದು ಮಾಡಿದ್ದು, ಎಲ್ಲದಕ್ಕೂ ಈ ತೀರ್ಮಾನ ಅನ್ವಯಿಸುವುದಿಲ್ಲ ಎಂದರು.

1,777 ಎಕರೆ ಡಿನೋಟಿಫಿಕೇಷನ್‌ ಕೈಬಿಟ್ಟಿದ್ದೇವೆ. ಆದರೆ ಭೂಮಾಲೀಕರು ಸ್ವಯಂಪ್ರೇರಿತರಾಗಿ ಭೂಮಿ ನೀಡಲು ಮುಂದಾದರೆ ಖರೀದಿಸುತ್ತೇವೆ. ಬಲವಂತವಾಗಿ ಖರೀದಿಸುವುದಿಲ್ಲ. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು ಎಂಬುದು ನಮ್ಮ ಆಶಯ. ಸರ್ಕಾರದ ನಿರ್ಧಾರ ದೇವನಹಳ್ಳಿ ಪ್ರದೇಶಕ್ಕೆ ಮಾತ್ರ ಸಿಮೀತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಮಾನ ನಿಲ್ದಾಣ ಸಮೀಪ ಇರುವುದರಿಂದ ಹಾಗೂ ಗ್ರೀನ್ ಬೆಲ್ಟ್ ನಲ್ಲಿ ಇರುವುದರಿಂದ ಸ್ವಾಧೀನಪಡಿಸಿಕೊಳ್ಳುವುದು ಬೇಡ ಎಂಬುದು ರೈತರ ಬೇಡಿಕೆಯಾಗಿತ್ತು. ಸರ್ಕಾರ ಈಗಾಗಲೇ ರೈತರು, ಹೋರಾಟಗಾರರರಿಂದ ಅಹವಾಲುಗಳನ್ನು ಆಲಿಸಿದೆ. ಸಚಿವ ಕೆ.ಎಚ್‌.ಮುನಿಯಪ್ಪ ಅವರು ಕೂಡಾ ರೈತರ ಪರವಾಗಿ ವಾದಿಸಿದ್ದರು ಎಂದರು.
ರೈತರ ಹೋರಾಟದಲ್ಲಿ ಪ್ರಗತಿಪರ ಸಂಘಟನೆಗಳು ಭಾಗಿಯಾಗಿದ್ದವು. ಪ್ರಗತಿಪರ ಹಾಗೂ ಎಡ ಸಂಘಟನೆಗಳು, ದಲಿತ ಸಂಘಟನೆಗಳು ಭಾಗಿಯಾಗಿದ್ದವು. ಇದೊಂದು ವಿಶಿಷ್ಟವಾದ ಐತಿಹಾಸಿಕವಾದ ಹೋರಾಟವಾಗಿತ್ತು. ಈ ಕುರಿತು ಸಾಧಕ ಬಾಧಕಗಳನ್ನು ಚರ್ಚೆ ಮಾಡಿ ರಾಜ್ಯಸರ್ಕಾರ ಇದೀಗ ತೀರ್ಮಾನಕ್ಕೆ ಬಂದಿದೆ ಎಂದರು.

ಕರ್ನಾಟಕ ಕೈಗಾರಿಕಾಭಿವೃದ್ದಿ ಮಂಡಳಿ(ಕೆಐಎಡಿಬಿ)ಯಿಂದ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ 13 ಗ್ರಾಮಗಳ 1777 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿತ್ತು. 2021ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. 2022ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು.

ಸರ್ಕಾರದ ಕ್ರಮಕ್ಕೆ ಪ್ರಕಾಶ್‌ ರೈ ಮೆಚ್ಚುಗೆ…
ಭೂಸ್ವಾಧೀನ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರದ ನಡೆಯನ್ನು ನಟ ಪ್ರಕಾಶ್‌ ರಾಜ್‌(ಪ್ರಕಾಶ್ ರೈ) ಪ್ರಶಂಸಿದ್ದಾರೆ. ಇದೇ ವೇಳೆ ಮಾತನಾಡಿ ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆಂದು ಎಂದು ನಟ ಪ್ರಕಾಶ್‌ ರೈ ಪ್ರಸಂಶಿಸಿದರು.

Leave a Reply

Your email address will not be published. Required fields are marked *

error: Content is protected !!